ಉಡುಪಿ : ಕೋಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಟ್ಟು ಬೀಚ್ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಗಾಳಿ ಮಳೆಯು ಹಾಗೂ ಚಂಡಮಾರುತದ ಪರಿಣಾಮವಾಗಿ ಕಡಲ್ಕೊರೆತ ಉಂಟಾಗಿದೆ. ಸಮುದ್ರ ತೀರ ಭಾಗದಲ್ಲಿ ಮಣ್ಣು ಕುಸಿತದಿಂದ ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದಾರೆ. ಸೋಮವಾರದಂದು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಕಡಲ್ಕೊರೆತವಾದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಶಾಸಕರು ಈ ಸಂದರ್ಭದಲ್ಲಿ ಬಂದರು ಮತ್ತು ಮೀನುಗಾರಿಕಾ ಇಲಾಖೆಯ ಅಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿ, ತುರ್ತು ಕ್ರಮವಾಗಿ ತಡೆಗೋಡೆ ಕಾಮಗಾರಿ ಕೈಗೊಳ್ಳುವಂತೆ ಸೂಚಿಸಿದರು. ಜೊತೆಗೆ, ಶಾಶ್ವತ ಪರಿಹಾರಕ್ಕಾಗಿ ಸಂಬಂಧಿಸಿದ ಸಚಿವರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಕಡಲ್ಕೊರೆತದಿಂದ ಸ್ಥಳೀಯ ಮೀನುಗಾರರ ಮನೆಗಳು ಹಾಗೂ ಸಣ್ಣ ವ್ಯಾಪಾರಿಗಳಿಗೆ ಅಪಾಯ ಉಂಟಾಗಿರುವುದರಿಂದ ಅಧಿಕಾರಿಗಳು ತಕ್ಷಣ ಸ್ಪಂದಿಸಬೇಕೆಂದು ಸ್ಥಳೀಯರು ಆಗ್ರಹ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಕೋಟೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಯೋಗೀಶ್, ಸದಸ್ಯರಾದ ರತ್ನಾಕರ್ ಕೋಟ್ಯಾನ್, ನಾಗರಾಜ್ ಮೆಂಡನ್, ಶಕ್ತಿ ಕೇಂದ್ರದ ಹರ್ಷಿತ್, ಗಣೇಶ್ ಮಟ್ಟು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.



