ಉಡುಪಿ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬೆಳ್ಳಾಲ ಗ್ರಾಮದಲ್ಲಿ ಯುವಕನೊಬ್ಬನನ್ನು ಮನೆಗೆ ಕರೆಸಿ ಮರಕ್ಕೆ ಕಟ್ಟಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಸನತ್ ಎಂಬ ಯುವಕನ ಮೇಲೆ ಯುವತಿಯ ಕುಟುಂಬಸ್ಥರು ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದ್ದು, ಘಟನೆಗೆ ಸಂಬಂಧಿಸಿದಂತೆ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

ಮಾಹಿತಿಯ ಪ್ರಕಾರ, ಸನತ್ ಮತ್ತು ಯುವತಿ ಒಂದೇ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ಈ ವೇಳೆ ಇಬ್ಬರ ನಡುವೆ ಪ್ರೀತಿ ಬೆಳೆದಿತ್ತು ಎನ್ನಲಾಗಿದೆ. ಬಳಿಕ ಯುವತಿ ಕೆಲಸ ತೊರೆದಿದ್ದು, ಸನತ್ನಿಂದ ಪಡೆದಿದ್ದ ರೂ 50 ಸಾವಿರ ಸಾಲವನ್ನು ವಾಪಸ್ ಕೇಳಿದಾಗ ಮನೆಗೆ ಬರುವಂತೆ ತಿಳಿಸಿದ್ದಳು ಎಂದು ಆರೋಪಿಸಲಾಗಿದೆ. ಮನೆಗೆ ತೆರಳಿದ ವೇಳೆ ಸನತ್ನನ್ನು ಮರಕ್ಕೆ ಕಟ್ಟಿ ಹಲ್ಲೆ ನಡೆಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಘಟನೆಯ ಬಳಿಕ ಯುವತಿಯ ದೂರಿನ ಮೇರೆಗೆ, ಸನತ್ ಮಹಿಳೆಯ ಮಾನಕ್ಕೆ ಧಕ್ಕೆ ಉಂಟುಮಾಡಿ ಜಾತಿ ನಿಂದನೆ ಮಾಡಿದ್ದಾನೆ ಎಂಬ ಆರೋಪದಡಿ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಿ ಆತನನ್ನು ಬಂಧಿಸಲಾಗಿದೆ.

ಇನ್ನೊಂದೆಡೆ, ತನ್ನನ್ನು ಮನೆಗೆ ಕರೆಸಿ ಮರಕ್ಕೆ ಕಟ್ಟಿ ಹಲ್ಲೆ ನಡೆಸಿ ಕೊಲೆ ಯತ್ನ ಮಾಡಲಾಗಿದೆ ಎಂದು ಸನತ್ ನೀಡಿದ ಪ್ರತಿದೂರಿನ ಮೇರೆಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದ್ದು, ಈ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಕರಣದ ಎರಡೂ ಆಯಾಮಗಳ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದು, ಉಳಿದ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.


