ಉಡುಪಿ: ಸಂಘಟಿತ – ಅಸಂಘಟಿತ ವಲಯದ ಕಾರ್ಮಿಕರ ಪರಿಸ್ಥಿತಿಯನ್ನು, ಸಮಸ್ಯೆಗಳನ್ನು ಇದಕ್ಕೆ ಕಾರಣವಾಗಿರುವ ಸರ್ಕಾರದ ನೀತಿಗಳನ್ನು ಜನತೆಯ ಮುಂದಿರಿಸಲು ಮತ್ತು ಈ ಸಮಾಜಕ್ಕೆ ಅನ್ನದಾತ ರೈತರ ಮತ್ತು ಕಾರ್ಮಿಕ ರಂಗದ ಸಮಸ್ಯೆಗಳಿಗೆ ಕಾರಣವಾಗಿರುವಂತಹ ನೀತಿಗಳನ್ನು ಬದಲಿಸುವಂತೆ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ ಮೇ.20 ರಂದು ದೇಶವ್ಯಾಪಿ ಸಾರ್ವತ್ರಿಕ ಮುಷ್ಕರಕ್ಕೆ ಕರೆ ನೀಡಿದೆ. ಈ ಬಗ್ಗೆ ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ರಾಜ್ಯ ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ ಮಾತನಾಡಿ, ಉಡುಪಿ ಜಿಲ್ಲಾ ಸಮಿತಿ ವತಿಯಿಂದಲೂ ಮುಷ್ಕರವು ಉಡುಪಿ, ಕುಂದಾಪುರ, ಬೈಂದೂರಿನಲ್ಲಿ ನಡೆಯಲಿದೆ. ಬ್ಯಾಂಕ್, ಎಲ್ಐಸಿ, ಅಂಚೆ, ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಲಿದ್ದಾರೆ.
ಅಂದು ಬೆಳಗ್ಗೆ 10 ಗಂಟೆಗೆ ಉಡುಪಿಯ ಹಳೆ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಿಂದ ಮೆರವಣಿಗೆ ಆರಂಭಗೊಂಡು, ಅಜ್ಜರಕಾಡು ಹುತಾತ್ಮ ಸ್ಮಾರಕದ ಮುಂಭಾಗ ಕೊನೆಗೊಳ್ಳಲಿದೆ. ನಂತರ ಸಭೆ ನಡೆಯಲಿದೆ ಎಂದರು. ಕುಂದಾಪುರದ ಶಾಸ್ತ್ರಿ ವೃತ್ತದಿಂದ ಆರಂಭಗೊಂಡು, ಬಸ್ ನಿಲ್ದಾಣವರೆಗೆ ಸಾಗಿ, ಶಾಸ್ತ್ರಿ ಸರ್ಕಲ್ ಗೆ ವಾಪಾಸಾಗಿ ಸಭೆ ನಡೆಯಲಿದೆ ಎಂದರು. ಜಿಲ್ಲಾ ಸಮಿತಿಯ ಪ್ರ.ಕಾರ್ಯದರ್ಶಿ ಸುರೇಶ್ ಕಲ್ಲಾಗರ ಮಾತನಾಡಿ, ಮೇ.17 ರಂದು ಉಡುಪಿ, ಕುಂದಾಪುರ, ಬೈಂದೂರು ಭಾಗಗಳಲ್ಲಿ ಪಾದಯಾತ್ರೆಯ ಮೂಲಕ ಕರಪತ್ರವನ್ನು ಹಂಚಲಿದ್ದೇವೆ ಎಂದರು. ಸುದ್ದಿಗೋಷ್ಠಿಯಲ್ಲಿ ರಾಜ್ಯ ಕಾರ್ಯದರ್ಶಿ ಕೆ.ಮಹಾಂತೇಶ್, ಜಿಲ್ಲಾ ಸಮಿತಿ ಕಾರ್ಯದರ್ಶಿಗಳಾದ ಶೇಖರ್ ಬಂಗೇರಾ, ಕವಿರಾಜ್.ಎಸ್.ಕೋಟ್ಯಾನ್ ಉಪಸ್ಥಿತರಿದ್ದರು.


