ಉಡುಪಿ : ಯುವಕರಿಂದ ಏನೂ ಸಾಧ್ಯವಿಲ್ಲ ಎಂಬ ಭಾವನೆ ನ್ಯಾಯಾಲಯ ಹಾಗೂ ಸರ್ಕಾರದಲ್ಲಿತ್ತು. ಯುವಕರನ್ನು ಕಾಕ್ರೋಚ್ಗಳು ಎಂದು ಕರೆದರೂ, ಅದೇ ಯುವಜನತೆ ದೆಹಲಿಯ ಜಂತರ್ ಮಂತರ್ನಲ್ಲಿ ತಮ್ಮ ಸಾಮರ್ಥ್ಯವನ್ನು ದೇಶಕ್ಕೆ ತೋರಿಸಿಕೊಟ್ಟಿದೆ ಎಂದು ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ಹೇಳಿದರು. ಅವರು ಸಾಲಿಗ್ರಾಮದ ಚೇಂಪಿ ವಿಶ್ವಕರ್ಮ ಸಭಾಭವನದಲ್ಲಿ ಭಾನುವಾರ ನಡೆದ ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ತಿಮ್ಮ ಪೂಜಾರಿ ಅವರ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಿಂದಾಗಿ 21 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದು, ಅನೇಕ ವಿದ್ಯಾರ್ಥಿಗಳು ಪರೀಕ್ಷೆಯಿಂದ ವಂಚಿತರಾಗಿದ್ದಾರೆ. ಯಾರೋ ಒಬ್ಬರ ಮನೆಯ ಮಕ್ಕಳಿಗೆ ಸಮಸ್ಯೆಯಾದರೆ ನಮಗೇನು ಎಂಬ ಮನೋಭಾವ ಸರಿಯಲ್ಲ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪ್ರತಿಯೊಬ್ಬರೂ ಅವರ ಪರವಾಗಿ ನಿಲ್ಲಬೇಕು ಎಂದು ಕರೆ ನೀಡಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದರು. ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮರೋಳಿ ಮಾತನಾಡಿ, ಕಾಂಗ್ರೆಸ್ ಎಂದಿಗೂ ಶ್ರೀರಾಮನ ಸಾಂಸ್ಕೃತಿಕ ಹಾಗೂ ಪೌರಾಣಿಕ ಅಸ್ತಿತ್ವವನ್ನು ಅಲ್ಲಗಳೆದಿಲ್ಲ. ಈ ಸತ್ಯವನ್ನು ಕಾಂಗ್ರೆಸ್ ಕಾರ್ಯಕರ್ತರು ಮನೆಮನೆಗೂ ತಲುಪಿಸಬೇಕು ಎಂದರು. ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳ ಪರ ನಡೆದ ಹೋರಾಟವನ್ನು ಕಾಂಗ್ರೆಸ್ ಬೆಂಬಲಿಸಿದ್ದು, ಜಾತಿ, ಮತ, ಧರ್ಮ, ಭಾಷೆ ಮೀರಿ ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಹೋರಾಡಿದ ಯುವಕರನ್ನು ಹಿಮ್ಮೆಟ್ಟಿಸುವ ಪ್ರಯತ್ನ ಸರಿಯಲ್ಲ ಎಂದು ಹೇಳಿದರು. ಅಹಮದಾಬಾದ್ನ ಮಾಜಿ ಶಾಸಕ ಹಿಮ್ಮತ್ ಸಿಂಗ್ ಪಟೇಲ್ ಸಭೆಯನ್ನುದ್ದೇಶಿಸಿ ಮಾತನಾಡಿದರು. ನೂತನ ಬ್ಲಾಕ್ ಅಧ್ಯಕ್ಷ ತಿಮ್ಮ ಪೂಜಾರಿ ಮಾತನಾಡಿ, ಕಾರ್ಯಕರ್ತರೊಂದಿಗೆ ಸದಾ ಸಂಪರ್ಕದಲ್ಲಿದ್ದು, ಅವರ ಸಹಕಾರದೊಂದಿಗೆ ಪ್ರಾಮಾಣಿಕವಾಗಿ ಪಕ್ಷ ಸಂಘಟನೆಗೆ ದುಡಿಯುವುದಾಗಿ ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ಕಾಂಗ್ರೆಸ್ ಮುಖಂಡ ಮೊಳಹಳ್ಳಿ ದಿನೇಶ್ ಹೆಗ್ಡೆ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ್ ಸೊರಕೆ, ಕಾಂಗ್ರೆಸ್ ಮುಖಂಡರಾದ ಕಿಶನ್ ಹೆಗ್ಡೆ, ರಾಜು ಪೂಜಾರಿ, ಮಲ್ಯಾಡಿ ಶಿವರಾಮ ಶೆಟ್ಟಿ, ರಮೇಶ್ ಕಾಂಚನ್, ಮಂಜುನಾಥ ಪೂಜಾರಿ, ರೇಖಾ ಪಿ. ಸುವರ್ಣ, ಜ್ಯೋತಿ ಹೆಬ್ಬಾರ್, ರಾಘವೇಂದ್ರ ಶೆಟ್ಟಿ ಕರ್ಜೆ, ಕೆದೂರು ಸದಾನಂದ ಶೆಟ್ಟಿ, ಪ್ರಸಾದ್ ರಾಜ್ ಕಾಂಚನ್, ಚಂದ್ರಶೇಖರ ಮೆಂಡನ್, ಪ್ರಖ್ಯಾತ್ ಶೆಟ್ಟಿ, ಭುಜಂಗ ಶೆಟ್ಟಿ, ಶ್ರೀನಿವಾಸ ಅಮೀನ್, ಮಮತಾ ಶೆಟ್ಟಿ, ಹಾವಂಜೆ ರಮೇಶ್ ಶೆಟ್ಟಿ, ಜಯಕುಮಾರ್, ಚಂದ್ರಶೇಖರ ಶೆಟ್ಟಿ, ನಿರೀಕ್ಷಾ ಮೆಂಡನ್, ಕಾವಡಿ ಉದಯಚಂದ್ರ ಶೆಟ್ಟಿ, ರೋಷನ್ ಕುಮಾರ್ ಶೆಟ್ಟಿ, ವಿಕಾಸ್ ಹೆಗ್ಡೆ, ಇಚ್ಚಿತಾರ್ಥ ಶೆಟ್ಟಿ, ರಂಜಿತ್ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಗೋಪಾಲ ಬಂಗೇರ ಅವರನ್ನು ಕೋಟ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಿ ಅಧಿಕಾರ ಹಸ್ತಾಂತರಿಸಲಾಯಿತು. ನಿರ್ಗಮಿತ ಅಧ್ಯಕ್ಷ ಶಂಕರ್ ಕುಂದರ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ಗೋಪಾಲ ಬಂಗೇರ ವಂದಿಸಿದರು. ಡಾ. ಸುನಿತಾ ಶೆಟ್ಟಿ ಹಾಗೂ ವಿನಯ ಕುಮಾರ್ ಕಬ್ಯಾಡಿ ಕಾರ್ಯಕ್ರಮ ನಿರೂಪಿಸಿದರು.


