ಉಡುಪಿ : ಕಾಪು ಪುರಸಭಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ದಿನೇ ದಿನೇ ಹೆಚ್ಚುತ್ತಿರುವ ರಸ್ತೆ ಅಪಘಾತಗಳ ಹಿನ್ನೆಲೆ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಸಂಬಂಧಿತ ಇಲಾಖೆಯ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿ ಸುರಕ್ಷತಾ ಕ್ರಮಗಳ ಕುರಿತು ಚರ್ಚಿಸಿದರು.

ಸಭೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ಪ್ರಾದೇಶಿಕ ಸಾರಿಗೆ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಭಾಗವಹಿಸಿ, ಅಪಘಾತಗಳಿಗೆ ಕಾರಣವಾಗುತ್ತಿರುವ ಅಂಶಗಳ ಕುರಿತು ಸಮಗ್ರವಾಗಿ ಚರ್ಚಿಸಲಾಯಿತು.

ಈ ವೇಳೆ ಶಾಸಕರು, ಸರ್ವಿಸ್ ರಸ್ತೆಗಳಲ್ಲಿನ ವಾಹನಗಳ ಅತಿವೇಗ ನಿಯಂತ್ರಣಕ್ಕಾಗಿ ತಕ್ಷಣವೇ ಸ್ಪೀಡ್ ಬ್ರೆಕರ್ಗಳನ್ನು ಅಳವಡಿಸುವಂತೆ ಸೂಚಿಸಿದರು. ಜೊತೆಗೆ, ಹೆದ್ದಾರಿ ಭಾಗದಲ್ಲಿನ ಬೀದಿ ದೀಪಗಳ ದುರಸ್ತಿ ಹಾಗೂ ಚರಂಡಿಗಳ ನಿರ್ವಹಣಾ ಕಾಮಗಾರಿಗಳನ್ನು ಶೀಘ್ರ ಕೈಗೆತ್ತಿಕೊಳ್ಳುವಂತೆ ಸಂಬಂಧಿತ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸಭೆಯಲ್ಲಿ ಕಾಪು ಪುರಸಭೆ ಅಧ್ಯಕ್ಷೆ ಮೋಹಿನಿ ಶೆಟ್ಟಿ, ಉಪಾಧ್ಯಕ್ಷೆ ಸರೀತಾ ಶಿವಾನಂದ, ಸ್ಥಾಯಿ ಸಮಿತಿ ಅಧ್ಯಕ್ಷ ಕಿರಣ್ ಆಳ್ವ, ಪುರಸಭೆ ಸದಸ್ಯರು, ಮುಖ್ಯಾಧಿಕಾರಿ ನೀಲಕಂಠ ಮೇಸ್ತಾ, ಪ್ರಭಾರ ಪ್ರಾದೇಶಿಕ ಸಾರಿಗೆ ಅಧಿಕಾರಿ ಸಂತೋಷ ಶೆಟ್ಟಿ, ಕಾಪು ಪೊಲೀಸ್ ಉಪನಿರೀಕ್ಷಕ ತೇಜಸ್ವಿ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿ ವಿಘ್ನೇಶ್ ಉಪಸ್ಥಿತರಿದ್ದರು.



