ಉಡುಪಿ: ರೈತರ ಬೆಳೆಗಳಿಗೆ ಖಚಿತ ಖರೀದಿ ವ್ಯವಸ್ಥೆ ಜಾರಿಗೊಳಿಸುವುದು, ರೈತರ ಕನಿಷ್ಠ ಬೆಂಬಲ ಬೆಲೆಗೆ ಕಾನೂನುಬದ್ಧ ಖಾತರಿ ನೀಡುವುದು, ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ತಡೆಯುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಪಿಐ ಉಡುಪಿ ತಾಲೂಕು ಸಮಿತಿ ವತಿಯಿಂದ ಉಡುಪಿ ನಗರದಲ್ಲಿ ಪ್ರತಿಭಟನಾ ಜಾಥಾ ನಡೆಯಿತು. ಉಡುಪಿಯ ಚಿತ್ತರಂಜನ್ ಸರ್ಕಲ್ನಿಂದ ಆರಂಭಗೊಂಡ ಜಾಥಾವು ಮೆಸ್ಕಾಂ ಕಚೇರಿ ಹಾಗೂ ನಗರಸಭೆ ಮೂಲಕ ಸಾಗಿ ಮತ್ತೆ ಚಿತ್ತರಂಜನ್ ಸರ್ಕಲ್ನಲ್ಲಿ ಸಮಾಪನಗೊಂಡಿತು.

ಈ ಸಂದರ್ಭದಲ್ಲಿ ಮಾತನಾಡಿದ ಸಿಪಿಐ ಮುಖಂಡ ಸೀತಾರಾಮ್ ಬೇರಿಂಜೆ, ಬೆಲೆ ಏರಿಕೆಯಿಂದಾಗಿ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಶಿಕ್ಷಣ ಕ್ಷೇತ್ರ ವ್ಯಾಪಾರೀಕರಣಗೊಳ್ಳುತ್ತಿದ್ದು, ಕಟ್ಟಡ ಕಾರ್ಮಿಕರು ಹಾಗೂ ಬೀಡಿ ಕಾರ್ಮಿಕರಿಗೆ ಸಮರ್ಪಕ ವೇತನ ದೊರೆಯುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ರೈತರ ಬೆಳೆಗಳಿಗೆ ಖಚಿತ ಖರೀದಿ ವ್ಯವಸ್ಥೆ ಕಲ್ಪಿಸುವುದು, ಕನಿಷ್ಠ ಬೆಂಬಲ ಬೆಲೆಗೆ ಕಾನೂನುಬದ್ಧ ಖಾತರಿ ನೀಡುವುದು, ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣವನ್ನು ನಿಲ್ಲಿಸುವುದು, ಕಟ್ಟಡ ಕಾರ್ಮಿಕರ ಪಿಂಚಣಿ ಹಾಗೂ ವಿದ್ಯಾರ್ಥಿಗಳ ವಿದ್ಯಾರ್ಥಿವೇತನವನ್ನು ಪರಿಷ್ಕರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸೆಪ್ಟೆಂಬರ್ 1ರಂದು ದೆಹಲಿ ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸೀತಾರಾಮ್ ಬೇರಿಂಜೆ ತಿಳಿಸಿದರು. ಪ್ರತಿಭಟನೆಯಲ್ಲಿ ಶಿವಾನಂದ್ ಸೇರಿದಂತೆ ಸಿಪಿಐ ಸಂಘಟನೆಯ ಪ್ರಮುಖರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.


