ಉಡುಪಿ: ರಸ್ತೆ ಅಪಘಾತ ಪ್ರಕರಣದಲ್ಲಿ ನ್ಯಾಯಾಲಯದಿಂದ ಶಿಕ್ಷೆಗೆ ಗುರಿಯಾಗಿ ಕಳೆದ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕನನ್ನು ಪಡುಬಿದ್ರಿ ಪೊಲೀಸರು ಮಹಾರಾಷ್ಟ್ರದ ಪುಣೆಯಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. 2002ರ ಸೆಪ್ಟೆಂಬರ್ 7ರಂದು ಬೆಳಿಗ್ಗೆ ಸುಮಾರು 8.30ಕ್ಕೆ ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಬಡಾ ಗ್ರಾಮದ ಮೂಳೂರು ಮಸೀದಿ ಸಮೀಪ ರಾಷ್ಟ್ರೀಯ ಹೆದ್ದಾರಿ–66ರಲ್ಲಿ ಮಿನಿ ಗೂಡ್ಸ್ ಲಾರಿಯನ್ನು ಮಹಾರಾಷ್ಟ್ರ ರಾಜ್ಯದ ಪುಣೆ ಜಿಲ್ಲೆಯ ಉತ್ತರಳ್ಳಿ ತಾಲೂಕಿನ ಬೋರ್ ನಿವಾಸಿ ಚಾಲಕ ವಿಲಾಸ್ ಶಿಂಧೆ ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಅತಿವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿ, ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಶಾಲಾ ಬಾಲಕನಿಗೆ ಡಿಕ್ಕಿ ಹೊಡೆದಿದ್ದ. ಪರಿಣಾಮ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದ.

ಈ ಸಂಬಂಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಪೂರ್ಣಗೊಳಿಸಿ ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಲಾಗಿತ್ತು. ವಿಚಾರಣೆ ಬಳಿಕ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಲಯವು ಲಾರಿ ಚಾಲಕನಿಗೆ ಮೂರು ತಿಂಗಳ ಸಾದಾ ಜೈಲು ಶಿಕ್ಷೆ ಹಾಗೂ 1,000 ದಂಡ ವಿಧಿಸಿತ್ತು. ಆದರೆ ತೀರ್ಪಿನ ಬಳಿಕ ಆರೋಪಿ ನ್ಯಾಯಾಲಯದ ಮುಂದೆ ಹಾಜರಾಗದೆ ತಲೆಮರೆಸಿಕೊಂಡಿದ್ದರಿಂದ, ನ್ಯಾಯಾಲಯವು ಆತನ ವಿರುದ್ಧ ಎಲ್ಪಿಸಿ ವಾರಂಟ್ ಜಾರಿಗೊಳಿಸಿತ್ತು.
ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ಐಪಿಎಸ್ ಅವರ ನಿರ್ದೇಶನದಂತೆ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ ಎಸ್. ನಾಯಕ್, ಕಾರ್ಕಳ ಉಪವಿಭಾಗದ ಡಿವೈಎಸ್ಪಿ ಎಸ್. ವಿಜಯಪ್ರಸಾದ್ ಹಾಗೂ ಕಾಪು ವೃತ್ತ ನಿರೀಕ್ಷಕ ಅಜ್ಮತ್ ಅಲಿ ಅವರ ಮಾರ್ಗದರ್ಶನದಲ್ಲಿ ಪಡುಬಿದ್ರಿ ಠಾಣೆಯ ಪಿಎಸ್ಐ ಸಕ್ತಿವೇಲು ಇ. ಮತ್ತು ಅನಿಲ್ ಕುಮಾರ್ ಟಿ. ನಾಯಕ್ ಅವರ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿತು. ಎಎಸ್ಐ ರಾಜೇಶ್ ಪಿ., ಹೆಡ್ ಕಾನ್ಸ್ಟೇಬಲ್ ಕೃಷ್ಣಪ್ರಸಾದ್ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಸಂದೇಶ್ ಭಂಡಾರಿ ಅವರು ಮಹಾರಾಷ್ಟ್ರದ ಪುಣೆಯಲ್ಲಿ ಆರೋಪಿ ಲಾರಿ ಚಾಲಕನಾಗಿ ಕೆಲಸ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಸಂಗ್ರಹಿಸಿ, ಸ್ಥಳಕ್ಕೆ ತೆರಳಿ ಆತನನ್ನು ಬಂಧಿಸಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.


